ಕರ್ನಾಟಕ
ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ; ಸಿಸಿಬಿ ಪೊಲೀಸರಿಂದ ಬಂಧನ! 1 ವರ್ಷ ಜಾಮೀನು ಇಲ್ಲ
ಬೆಂಗಳೂರು: ರಾಷ್ಟ್ರ ರಕ್ಷಣಾ ಪಡೆ ಸಂಘಟನೆಯ ಮುಖಂಡ ಪುನೀತ್ ಕೆರೆಹಳ್ಳಿ ವಿರುದ್ಧ ಕರ್ನಾಟಕ ರಾಜ್ಯ ಗೂಂಡಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ. ಸಿಸಿಬಿ ಪೊಲೀಸರು ಆತನನ್ನು ಬಂಧಿಸಿದ್ದಾರೆ.
ಈ ಕುರಿತು ಶುಕ್ರವಾರ ತಡರಾತ್ರಿ ರಾಜ್ಯ ಸರ್ಕಾರ ಮಾಹಿತಿ ನೀಡಿದ್ದು, ಕಳೆದ ಹತ್ತು ವರ್ಷಗಳ ಸಮಾಜದಲ್ಲಿ ಸಾಮರಸ್ಯ ಕದಡುವ, ಸಮಾಜ ವಿರೋಧ ಕಾರ್ಯಗಳ, ಅಪರಾಧ ಪ್ರಕರಣಗಳನ್ನು ಆಧರಿಸಿ ಪುನೀತ್ ಕೆರೆಹಳ್ಳಿ ವಿರುದ್ಧ ಗೂಂಡಾ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿಸಿದೆ.
32 ವರ್ಷದ ಈತ ಬೆಂಗಳೂರಿನ ಜೆಪಿ ನಗರ ನಿವಾಸಿಯಾಗಿದ್ದು, ಮೂಲತಃ ಹಾಸನದವನು. ರಾಷ್ಟ್ರ ರಕ್ಷಣಾ ಪಡೆ ಎಂಬ ಸಂಘಟನೆಯನ್ನು ನಡೆಸುತ್ತಿದ್ದು, ಆ ಮೂಲಕ ಜನರನ್ನು ಬೆದರಿಸುವ, ಸಮಾಜದ ಶಾಂತಿ ಕದಡುವ, ಗೋ ರಕ್ಷಣೆ ಹೆಸರಿನಲ್ಲಿ ವ್ಯಾಪಾರಿಗಳನ್ನು ಬೆದರಿಸುವ ಕಾರ್ಯಗಳಲ್ಲಿ ತೊಡಗಿದ್ದರು ಎಂದು ಮಾಹಿತಿ ನೀಡಲಾಗಿದೆ.
ಕಳೆದ ಒಂದು ತಿಂಗಳಿಂದ ಸಿದ್ಧತೆ
ಪುನೀತ್ ಕುಮಾರ್ ಅಲಿಯಾಸ್ ಪುನೀತ್ ಕೆರೆಹಳ್ಳಿ ವಿರುದ್ಧ ರೌಡಿಪಟ್ಟಿ ತೆರೆಯಲು ಪೊಲೀಸರು ಒಂದು ತಿಂಗಳು ಸಿದ್ಧತೆ ನಡೆಸಿದ್ದಾರೆ. ಈ ಬಗ್ಗೆ ಕಳೆದ ತಿಂಗಳು ಚಾಮರಾಜಪೇಟೆ ಉಪ ವಿಭಾಗದ ಪೊಲೀಸರು ಪುನೀತ್ಗೆ ತಿಳಿವಳಿಕೆ ನೋಟಿಸ್ ಜಾರಿ ಮಾಡಿದ್ದರು.
ಪುನೀತ್ ವಿರುದ್ಧ ಬೆಂಗಳೂರಿನ ಚಾಮರಾಜಪೇಟೆ, ವಿಜಯನಗರ ಜಿಲ್ಲೆಯ ಹಂಪಿ ಟೂರಿಸಂ ಪೊಲೀಸ್ ಠಾಣೆ, ರಾಮನಗರ ಜಿಲ್ಲೆಯ ಸಾತನೂರು ಸೇರಿದಂತೆ ರಾಜ್ಯದ ಹಲವು ಠಾಣೆಗಳಲ್ಲಿ ದೊಂಬಿ, ಕೊಲೆ, ಹಲ್ಲೆ, ಪ್ರಾಣ ಬೆದರಿಕೆ ಪ್ರಕರಣಗಳು ದಾಖಲಾಗಿವೆ. ಹೀಗಾಗಿ, ರೌಡಿಪಟ್ಟಿ ತೆರೆಯಲು ಸಿದ್ಧತೆ ನಡೆದಿದೆ ಎಂದು ಚಾಮರಾಜಪೇಟೆ ಪೊಲೀಸರು ಮಾಹಿತಿ ನೀಡಿದ್ದರು.
ವಿವರಣೆ ಕೇಳಿದ್ದ ಪೊಲೀಸರು
ಹಲವು ಪ್ರಕರಣಗಳಲ್ಲಿ ಆರೋಪಿಯಾಗಿರುವ ನಿಮ್ಮ ಮೇಲೆ ಏಕೆ ರೌಡಿಪಟ್ಟಿ ತೆರೆಯಬಾರದು ಎಂಬುದಕ್ಕೆ ನನಗೆ ವಿವರಣೆ ಸಲ್ಲಿಸಬಹದು. ಇಲ್ಲದಿದ್ದರೆ ವಿವರಣೆ ಇಲ್ಲವೆಂದು ಪರಿಗಣಿಸಿ ರೌಡಿಪಟ್ಟಿ ತೆರೆಯಲಾಗುವುದು’ ಎಂದು ಚಿಕ್ಕಪೇಟೆ ಉಪ ವಿಭಾಗದ ಸಹಾಯಕ ಪೊಲೀಸ್ ಆಯುಕ್ತರು, ಪುನೀತ್ಗೆ ಜಾರಿಗೊಳಿಸಿರುವ ನೋಟಿಸ್ನಲ್ಲಿ ಉಲ್ಲೇಖಿಸಿದ್ದರು.
ಜಾಮೀನಿನ ಮೇಲೆ ಹೊರಗೆ
ಇತ್ತೀಚೆಗೆ ರಾಮನಗರ ಜಿಲ್ಲೆಯಲ್ಲಿ ಗೋ ಸಾಗಣೆ ಮಾಡುತ್ತಿದ್ದರು ಎಂಬ ಆರೋಪದ ಮೇಲೆ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆ ನಡೆಸಿ ಸಾಯಿಸಿದ್ದರು ಎಂದು ಪ್ರಕರಣ ದಾಖಲಾಗಿತ್ತು. ಆ ಸಂದರ್ಭದಲ್ಲಿ ಬಂಧನಕ್ಕೆ ಒಳಗಾಗಿ ನ್ಯಾಯಾಲಯದ ಜಾಮೀನಿನ ಮೇಲೆ ಬಿಡುಗಡೆಯಾಗಿತ್ತು.
ನೇರವಾಗಿ ಜೈಲಿಗೆ; ಒಂದು ವರ್ಷ ಜಾಮೀನು ಕೂಡಾ ಸಿಗುವುದಿಲ್ಲ
ಗೂಂಡಾ ಕಾಯ್ದೆಯಲ್ಲಿ ಬಂಧಿಸಲಾದ ವ್ಯಕ್ತಿಯನ್ನು ಇತರ ಪ್ರಕರಣಗಳ ಮಾದರಿಯಲ್ಲಿ 24 ಗಂಟೆಗಳ ಒಳಗೆ ನ್ಯಾಯಾಧೀಶರ ಎದುರು ಹಾಜರುಪಡಿಸಬೇಕಾದ ಅಗತ್ಯವು ಇರುವುದಿಲ್ಲ. ಪೊಲೀಸ್ ಕಸ್ಟಡಿ ಅಥವಾ ನ್ಯಾಯಾಂಗ ಬಂಧನವನ್ನು ಪದೇ ಪದೇ ವಿಸ್ತರಿಸಿಕೊಳ್ಳುವ ಪ್ರಕ್ರಿಯೆಯ ಅಗತ್ಯವೂ ಇಲ್ಲದೇ ನೇರವಾಗಿ ಜೈಲಿಗೆ ಕಳುಹಿಸಬಹುದು. ಗೂಂಡಾ ಕಾಯ್ದೆ ಅಡಿಯಲ್ಲಿ ಬಂಧಿತನಾದಲ್ಲಿ ಅಪರಾಧಿಗೆ ನ್ಯಾಯಾಲಯದಲ್ಲಿ ಒಂದು ವರ್ಷ ಜಾಮೀನು ಸಿಗುವುದಿಲ್ಲ. ಎಂದು ಪೊಲೀಸ್ ಮೂಲಗಳು ತಿಳಿಸಿವೆ.






